ಕರಾವಳಿ ವಾಯ್ಸ್ ನ್ಯೂಸ್ 

ಕುಮಟಾ: ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ಮನೆಗೆ ಅಕ್ರಮ ಪ್ರವೇಶ ಮಾಡಿ ಕುಟುಂಬ ಸದಸ್ಯರಿಗೆ ಅವಾಚ್ಯವಾಗಿ ಬೈದು ಜೀವ ಬೆದರಿಕೆ ಹಾಕಿದ ಆರೋಪದಡಿ ಆರು ಮಂದಿಯ ವಿರುದ್ಧ ಕುಮಟಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಲಕೋಡ ಹೆಗಡೆ ಗ್ರಾಮದ ನಿವಾಸಿ ಬೀರಾ (57) ಅವರು ನೀಡಿದ ದೂರಿನ ಮೇರೆಗೆ ಶ್ರೀಧರ, ಲಕ್ಷ್ಮೀ, ಮಾದೇವ, ಪಾರ್ವತಿ, ಗಣಪತಿ ಹಾಗೂ ಮಾದೇವಿ ಗೌಡ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ದೂರಿನ ಪ್ರಕಾರ, ಜಮೀನು ಸಂಬಂಧಿತ ಮೂಲ ದಾವೆ ಸಂಖ್ಯೆ 90/2017 ಕುಮಟಾ ನ್ಯಾಯಾಲಯದಲ್ಲಿ ವಿಚಾರಣೆಯ ಹಂತದಲ್ಲಿದೆ. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಮಾ.13 ರಂದು ರಾತ್ರಿ ಸುಮಾರು 8 ಗಂಟೆಗೆ ಆರೋಪಿತರು ಕೈಯಲ್ಲಿ ರಾಡ್ ಹಾಗೂ ಸೊಟ್ಟೆಗಳನ್ನು ಹಿಡಿದು ಬೀರಾ ಅವರ ಮನೆಯಲ್ಲಿ ಅಕ್ರಮವಾಗಿ ನುಗ್ಗಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಆ ವೇಳೆ ಮನೆಯಲ್ಲಿ ಬೀರಾ ಇರದ ಸಂದರ್ಭದಲ್ಲಿ, ಅವರ ಪತ್ನಿ ಹಾಗೂ ಪುತ್ರಿಯರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ನ್ಯಾಯಾಲಯದಲ್ಲಿ ದಾಖಲಿಸಿರುವ ಸಿವಿಲ್ ಪ್ರಕರಣವನ್ನು ತಕ್ಷಣ ಹಿಂಪಡೆಯಬೇಕು ಎಂದು ಒತ್ತಾಯಿಸಿದ್ದಾರೆ. ಹಾಗಿಲ್ಲದಿದ್ದರೆ ಮನೆಗೆ ಹಾನಿ ಮಾಡುವುದು ಹಾಗೂ ಊರು ಬಿಟ್ಟು ಓಡಿಸುವುದಾಗಿ ಜೀವ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಲಾಗಿದೆ.

ಈ ಕುರಿತು ಕುಮಟಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

Please Share: