ಕರಾವಳಿ ವಾಯ್ಸ್ ನ್ಯೂಸ್ 

ಕಾರವಾರ: ಶೃಂಗೇರಿ ಶಾರಾದಾ ಪೀಠಾಧೀಶ್ವರರಾದ ಶ್ರೀ ಮಜ್ಜಗದ್ಗುರು ಶ್ರೀ ಶ್ರೀ ವಿಧುಶೇಖರ ಭಾರತೀ ಸನ್ನಿಧಾನಂಗಳವರ ವಿಜಯಯಾತ್ರೆಯ ಸುಸಂದರ್ಭದಲ್ಲಿ, ಪುರಾಣ ಪ್ರಸಿದ್ಧ ಶೇಜವಾಡ ಶ್ರೀ ಶೆಜ್ಜೇಶ್ವರ ದೇವಾಲಯದ ಪುನರ್ ನಿರ್ಮಾಣಕ್ಕಾಗಿ ಭೂಮಿ ಪೂಜೆ ನೆರವೇರಿಸಿದ ಹಿನ್ನೆಲೆಯಲ್ಲಿ, ಕಾರವಾರದಲ್ಲಿ ಭವ್ಯ ಗುರುವಂದನ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಕಾರವಾರ-ಅಂಕೋಲಾ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕಿ ರೂಪಾಲಿ ಎಸ್. ನಾಯ್ಕ ಅವರ ನೇತೃತ್ವದಲ್ಲಿ ಏಪ್ರಿಲ್ 15ರಂದು (ಬುಧವಾರ) ಸಂಜೆ 5 ಗಂಟೆಗೆ ಕಾರವಾರದ ಮಾಲಾದೇವಿ ಮೈದಾನದಲ್ಲಿ ಈ ಕಾರ್ಯಕ್ರಮ ನಡೆಯಲಿದೆ.

ಕಾರ್ಯಕ್ರಮದಲ್ಲಿ ಶ್ರೀಗಳನ್ನು ಪೂರ್ಣಕುಂಭ, ವೇದಘೋಷಗಳೊಂದಿಗೆ ಅದ್ಧೂರಿಯಾಗಿ ಸ್ವಾಗತಿಸಲಾಗುತ್ತದೆ. ಶ್ರೀಗಳು ದಿವ್ಯ ಸಾನ್ನಿಧ್ಯ ವಹಿಸಿ ಭಕ್ತರಿಗೆ ದರ್ಶನ ನೀಡಿ, ಆಶೀರ್ವಾದಗಳನ್ನು ದಯಪಾಲಿಸಲಿದ್ದಾರೆ ಹಾಗೂ ಆಶೀರ್ವಚನ ಮಾಡಲಿದ್ದಾರೆ.

ಈ ಮಹತ್ವದ ಸಮಾರಂಭದಲ್ಲಿ ರಾಜ್ಯ ಉಚ್ಛ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿ ಎಂ.ಜಿ. ಉಮಾ ಅವರು ಮುಖ್ಯ ಉಪಸ್ಥಿತರಾಗಿದ್ದು, ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಹಾಗೂ ಉಡುಪಿ ಲೋಕಸಭಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಉಪಸ್ಥಿತರಿರಲಿದ್ದಾರೆ.

ಈ ಪವಿತ್ರ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಶ್ರೀಗಳ ದರ್ಶನ ಮತ್ತು ಆಶೀರ್ವಾದ ಪಡೆಯುವಂತೆ ಮಾಜಿ ಶಾಸಕಿ ರೂಪಾಲಿ ಎಸ್. ನಾಯ್ಕ ಅವರು ಸಮಸ್ತ ಭಕ್ತರು ಮತ್ತು ನಾಗರಿಕರಿಗೆ ಮನವಿ ಮಾಡಿದ್ದಾರೆ.

 

Please Share: