ಕರಾವಳಿ ವಾಯ್ಸ್ ನ್ಯೂಸ್
ಕಾರವಾರ, ಮೇ 9: ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಮೀಟರ್ ಬಡ್ಡಿ ಕಿಂಗ್ಪಿನ್ ಜಮೀರ್ ಕೊಲೆ ಪ್ರಕರಣದಲ್ಲಿ ಪೊಲೀಸರು ಮಹತ್ವದ ಯಶಸ್ಸು ಸಾಧಿಸಿದ್ದು, ಕೊಲೆಗೆ ಬಳಸಿದ್ದ ಕಂಟ್ರಿ ಮೇಡ್ ಪಿಸ್ತೂಲ್ ಸೇರಿ ಒಟ್ಟು ಮೂರು ಪಿಸ್ತೂಲ್ಗಳನ್ನು ವಶಪಡಿಸಿಕೊಂಡು ಈವರೆಗೆ 11 ಆರೋಪಿಗಳನ್ನು ಬಂಧಿಸಿದ್ದಾರೆ.
ಪ್ರಕರಣ ಸಂಬಂಧ ಈಗಾಗಲೇ ಏಳು ಆರೋಪಿಗಳನ್ನು ಬಂಧಿಸಿದ್ದ ಪೊಲೀಸರು, ಕೊಲೆಗೆ ಬಳಸಿದ್ದ ಪಿಸ್ತೂಲ್ ಕುರಿತು ನಡೆಸಿದ ಮುಂದಿನ ತನಿಖೆಯಲ್ಲಿ ಜಹೀರ್ ಶೇಖ್, ಮಹಮ್ಮದ್ ಸಾಧೀಕ್, ಅಸ್ಕರ್ ಅಲಿ ದೊಡ್ಡಮನಿ ಹಾಗೂ ಸಾಹಿಲ್ ನಂದಿಗಟ್ಟಿ ಎಂಬ ನಾಲ್ವರನ್ನು ಬಂಧಿಸಿದ್ದಾರೆ.
ಪೊಲೀಸರ ತನಿಖೆಯಲ್ಲಿ, ಜಮೀರ್ ಹತ್ಯೆಗೆ ಬಳಸಿದ್ದ ಕಂಟ್ರಿ ಮೇಡ್ ಪಿಸ್ತೂಲ್ ಅನ್ನು ಕಳೆದ ಎರಡು ವರ್ಷಗಳ ಹಿಂದೆ ಉತ್ತರ ಪ್ರದೇಶದ ಗೋರಖಪುರದಿಂದ ತರಲಾಗಿತ್ತು ಎಂಬ ಸಂಗತಿ ಬೆಳಕಿಗೆ ಬಂದಿದೆ. ಇದೇ ಪಿಸ್ತೂಲ್ ಬಳಸಿ ಜಮೀರ್ನ ಹತ್ಯೆ ನಡೆಸಲಾಗಿತ್ತು ಎಂದು ತಿಳಿದುಬಂದಿದೆ.
ಪ್ರಕರಣ ಸಂಬಂಧ ಇನ್ನಷ್ಟು ತನಿಖೆ ಮುಂದುವರಿದಿದ್ದು, ಬಂಧಿತರಿಂದ ಹೆಚ್ಚಿನ ಮಾಹಿತಿ ಕಲೆಹಾಕಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
