ಕರಾವಳಿ ವಾಯ್ಸ್ ನ್ಯೂಸ್ 

ಜೋಯಿಡಾ: ಚಾಲಕನ ನಿಯಂತ್ರಣ ತಪ್ಪಿ ಕೆಎಸ್‌ಆರ್‌ಟಿಸಿ ಬಸ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರನೋರ್ವ ಗಂಭೀರವಾಗಿ ಗಾಯಗೊಂಡ ಘಟನೆ ತಾಲೂಕಿನ ಜಂಗಲ್‌ಬೆಟ್ ಸಮೀಪ ಶುಕ್ರವಾರ ಸಂಭವಿಸಿದೆ.

Banner Ad

ಗಾಯಾಳನ್ನು ಮಹಾರಾಷ್ಟ್ರದ ಕೊಲ್ಹಾಪುರ ಮೂಲದ ಯುವಕ ಚೇತನ್ (27) ಎಂದು ಗುರುತಿಸಲಾಗಿದ್ದು, ಗೋಕರ್ಣದತ್ತ ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ಅಪಘಾತಕ್ಕೀಡಾಗಿದ್ದಾನೆ.

ದಾಂಡೇಲಿಯಿಂದ ರಾಮನಗರದತ್ತ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ಗೆ ಯುವಕ ಚಲಾಯಿಸುತ್ತಿದ್ದ ಬೈಕ್ ಡಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ. ಡಿಕ್ಕಿಯ ತೀವ್ರತೆಗೆ ಯುವಕ ರಸ್ತೆ ಮೇಲೆ ಬಿದ್ದಿದ್ದು, ಬಸ್‌ನ ಚಕ್ರವು ಆತನ ಕಾಲಿನ ಮೇಲೆ ಹರಿದ ಪರಿಣಾಮ ಗಂಭೀರ ಗಾಯಗಳಾಗಿವೆ.

ಅಪಘಾತದ ತಕ್ಷಣ ಸ್ಥಳೀಯರು ಗಾಯಾಳುವನ್ನು ರಾಮನಗರ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿದ್ದಾರೆ. ಬಳಿಕ ಹೆಚ್ಚಿನ ಚಿಕಿತ್ಸೆಗೆ ಬೆಳಗಾವಿಯ ಆಸ್ಪತ್ರೆಗೆ ರವಾನಿಸಲಾಗಿದೆ.

ಘಟನೆಯ ಮಾಹಿತಿ ತಿಳಿದು ರಾಮನಗರ ಪೊಲೀಸ್ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ರಾಮನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಪಘಾತಕ್ಕೆ ನಿಖರ ಕಾರಣದ ಕುರಿತು ಪೊಲೀಸರು ತನಿಖೆ ಕೈಗೊಂಡಿದ್ದಾರೆ.

 

 

Please Share: