ಕರಾವಳಿ ವಾಯ್ಸ್ ನ್ಯೂಸ್ 

ದಕ್ಷಿಣ ಕನ್ನಡ: ಜಿಲ್ಲೆಯ ಪುತ್ತೂರಿನಲ್ಲಿ ಶುಕ್ರವಾರ ಭಾರತೀಯ ಜನತಾ ಪಕ್ಷದ ವತಿಯಿಂದ ಆಯೋಜಿಸಲಾದ ಬೃಹತ್ ತಿರಂಗಾಯಾತ್ರೆಯಲ್ಲಿ ‘ಹರ್ ಘರ್ ತಿರಂಗಾ’ ಅಭಿಯಾನದ ರಾಜ್ಯ ಸಂಚಾಲಕಿ ರೂಪಾಲಿ ಎಸ್. ನಾಯ್ಕ ಭಾಗವಹಿಸಿದರು. ಸುರಿಯುತ್ತಿದ್ದ ಮಳೆಯ ನಡುವೆಯೂ ಸಾವಿರಾರು ಜನರು ಉತ್ಸಾಹದಿಂದ ಪಾಲ್ಗೊಂಡು ರಾಷ್ಟ್ರಭಕ್ತಿ ಮೆರೆದರು.

ಬಿಜೆಪಿ ಪುತ್ತೂರು ಮಂಡಲದ ಆಶ್ರಯದಲ್ಲಿ ನಡೆದ ತಿರಂಗಾಯಾತ್ರೆಯು ಶ್ರೀ ಮಹಾಲಿಂಗೇಶ್ವರ ದೇವಾಲಯದಿಂದ ಆರಂಭವಾಗಿ ಪುತ್ತೂರು ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಕಿಲ್ಲೇ ಮೈದಾನದ ನಗರಸಭೆ ಭವನದವರೆಗೆ ಸಾಗಿತು. ಬಳಿಕ ಸಭೆ ನಡೆಯಿತು.

ಕಾರ್ಯಕ್ರಮದಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ, ಸಂಸದ ಬ್ರಿಜೇಶ್ ಚೌಟ, ಶಾಸಕರಾದ ಹರೀಶ ಪೂಂಜಾ, ಭರತ್ ಶೆಟ್ಟಿ, ವೇದವ್ಯಾಸ ಕಾಮತ್, ಭಾಗೀರಥಿ ಮರುಳ್ಯ, ವಿಧಾನ ಪರಿಷತ್ ಸದಸ್ಯ ಕಿಶೋರ್, ಬಿಜೆಪಿ ಜಿಲ್ಲಾ ಅಧ್ಯಕ್ಷ ಸತೀಶ್ ಕಂಪಲ, ಮಾಜಿ ಶಾಸಕ ಸಂಜೀವ ಮಠಂದೂರು, ವಿಭಾಗ ಪ್ರಭಾರಿ ಭಾರತೇಶ್, ಪುತ್ತೂರು ಮಂಡಲ ಅಧ್ಯಕ್ಷ ಸದಾನಂದ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.

ಬಿಜೆಪಿ ರಾಜ್ಯ ಉಪಾಧ್ಯಕ್ಷೆ, ಕಾರವಾರ–ಅಂಕೋಲಾ ಕ್ಷೇತ್ರದ ಮಾಜಿ ಶಾಸಕಿ ಹಾಗೂ ದಕ್ಷಿಣ ಕನ್ನಡ ಮತ್ತು ಶಿವಮೊಗ್ಗ ಸಂಘಟನಾ ಪ್ರಭಾರಿಯಾಗಿರುವ ರೂಪಾಲಿ ಎಸ್. ನಾಯ್ಕ ತಿರಂಗಾಯಾತ್ರೆಯಲ್ಲಿ ಪಾಲ್ಗೊಂಡು ಗಮನ ಸೆಳೆದರು.

ಮಹಿಳೆಯರು, ಯುವಕರು ಹಾಗೂ ಯುವತಿಯರು ಸೇರಿದಂತೆ ಸಾವಿರಾರು ಜನರು ಮಳೆಯನ್ನು ಲೆಕ್ಕಿಸದೆ ತಿರಂಗಾ ಹಿಡಿದು ಯಾತ್ರೆಯಲ್ಲಿ ಪಾಲ್ಗೊಂಡು ದೇಶಭಕ್ತಿಯ ಸಂದೇಶ ಸಾರಿದರು. ‘ಹರ್ ಘರ್ ತಿರಂಗಾ’ ಅಭಿಯಾನದ ಅಂಗವಾಗಿ ಆಯೋಜಿಸಲಾದ ಈ ತಿರಂಗಾಯಾತ್ರೆ ಯಶಸ್ವಿಯಾಗಿ ನೆರವೇರಿತು.

 

Please Share: