ಕರಾವಳಿ ವಾಯ್ಸ್ ನ್ಯೂಸ್ 

ದಾಂಡೇಲಿ: ದನಕರುಗಳಿಗೆ ಮೇವು ತರಲು ಕಬ್ಬಿನ ಗದ್ದೆಗೆ ತೆರಳಿದ್ದ ರೈತನ ಮೇಲೆ ಕಾಡುಹಂದಿ ಏಕಾಏಕಿ ದಾಳಿ ನಡೆಸಿ ಗಾಯಗೊಳಿಸಿದ ಘಟನೆ ತಾಲೂಕಿನ ಆಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಕ್ಕಲಗದಲ್ಲಿ ಗುರುವಾರ ಬೆಳಿಗ್ಗೆ ನಡೆದಿದೆ.

ಕೇರವಾಡ ಗ್ರಾಮದ ರೈತ ಪರಶುರಾಮ ಅರ್ಜುನ ಕದಂ (45) ಗಾಯಗೊಂಡವರು. ಎಂದಿನಂತೆ ದನಕರುಗಳಿಗೆ ಮೇವು ತರಲು ಸಕ್ಕಲಗದಲ್ಲಿರುವ ಕಬ್ಬಿನ ಗದ್ದೆಗೆ ತೆರಳಿದ್ದ ವೇಳೆ ಗದ್ದೆಯಲ್ಲಿದ್ದ ಕಾಡುಹಂದಿ ಏಕಾಏಕಿ ಅವರ ಮೇಲೆ ದಾಳಿ ನಡೆಸಿದೆ. ದಾಳಿಯಿಂದ ಅವರು ತಪ್ಪಿಸಿಕೊಳ್ಳಲು ಪ್ರಯತ್ನಿಸಿದರೂ ಕಾಡುಹಂದಿ ಬೆನ್ನಟ್ಟಿದ್ದು, ಸೊಂಟ ಹಾಗೂ ಕಾಲಿಗೆ ಗಾಯಗಳಾಗಿವೆ.

ಕಾಡುಹಂದಿಯ ದಾಳಿಯಿಂದ ಗಾಯಗೊಂಡು ನೋವಿನಿಂದ ಬಳಲುತ್ತಿದ್ದ ಪರಶುರಾಮ ಅವರನ್ನು ಸ್ಥಳೀಯರು ಹಾಗೂ ಕುಟುಂಬಸ್ಥರು ತಕ್ಷಣ ದಾಂಡೇಲಿ ಸಾರ್ವಜನಿಕ ಆಸ್ಪತ್ರೆಗೆ ಕರೆತಂದು ದಾಖಲಿಸಿದ್ದಾರೆ. ಆಸ್ಪತ್ರೆಯಲ್ಲಿ ವೈದ್ಯರು ಚಿಕಿತ್ಸೆ ನೀಡಿದ್ದು, ಸದ್ಯ ಅವರು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ತಿಳಿದುಬಂದಿದೆ.

ಕಬ್ಬು ಹಾಗೂ ಇತರೆ ಬೆಳೆಗಳ ಗದ್ದೆಗಳಿಗೆ ಕಾಡುಪ್ರಾಣಿಗಳು ಆಗಾಗ್ಗೆ ಬರುತ್ತಿರುವ ಹಿನ್ನೆಲೆಯಲ್ಲಿ ರೈತರು ಆತಂಕದಿಂದಲೇ ಕೃಷಿ ಚಟುವಟಿಕೆ ನಡೆಸುವಂತಾಗಿದೆ. ದನಕರುಗಳಿಗೆ ಮೇವು ತರಲು ಅಥವಾ ಹೊಲದ ಕೆಲಸಕ್ಕೆ ತೆರಳುವ ರೈತರು ಕಾಡುಪ್ರಾಣಿಗಳ ದಾಳಿಯ ಭೀತಿಯಲ್ಲೇ ಇರಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಅದರಲ್ಲೂ ಕಬ್ಬಿನಂತಹ ದಟ್ಟ ಬೆಳೆಗಳ ನಡುವೆ ಕಾಡುಹಂದಿಗಳು ಅಡಗಿಕೊಂಡಿರುವುದು ರೈತರಿಗೆ ಅಪಾಯಕಾರಿಯಾಗುತ್ತಿದೆ.

ಘಟನೆಯ ಮಾಹಿತಿ ತಿಳಿದು ದಾಂಡೇಲಿ ಗ್ರಾಮೀಣ ಠಾಣೆಯ ಪೊಲೀಸರು ಹಾಗೂ ಅರಣ್ಯ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿ ಗಾಯಗೊಂಡ ರೈತನ ಆರೋಗ್ಯ ವಿಚಾರಿಸಿದರು. ಘಟನೆಯ ಕುರಿತು ಮಾಹಿತಿ ಪಡೆದುಕೊಂಡ ಅಧಿಕಾರಿಗಳು ಮುಂದಿನ ಕ್ರಮದ ಬಗ್ಗೆ ಪರಿಶೀಲನೆ ನಡೆಸಿದ್ದಾರೆ.

ಕಾಡುಪ್ರಾಣಿಗಳ ಹಾವಳಿ ಹೆಚ್ಚುತ್ತಿರುವ ಪ್ರದೇಶಗಳಲ್ಲಿ ಅರಣ್ಯ ಇಲಾಖೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು. ರೈತರು ತಮ್ಮ ಜಮೀನುಗಳಿಗೆ ತೆರಳುವ ಸಂದರ್ಭದಲ್ಲಿ ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಜಾಗೃತಿ ಮೂಡಿಸಬೇಕು ಎಂದು ಸ್ಥಳೀಯರು ಮನವಿ ಮಾಡಿದ್ದಾರೆ.

ಕಾಡುಹಂದಿ ದಾಳಿಗೆ ಗಾಯಗೊಂಡಿರುವ ರೈತ

ಕಾಡು ಹಂದಿ ದಾಳಿಯಿಂದ ಗಾಯಗೊಂಡಿರುವ ರೈತ

Please Share: