ಕರಾವಳಿ ವಾಯ್ಸ್ ನ್ಯೂಸ್
ದಾಂಡೇಲಿ: ನಿಯಂತ್ರಣ ತಪ್ಪಿದ ಕಾರೊಂದು ಪಲ್ಟಿಯಾದ ಭೀಕರ ರಸ್ತೆ ಅಪಘಾತ ಶುಕ್ರವಾರ ಸಂಜೆ ತಾಲೂಕಿನ ಜನತಾ ಕಾಲೋನಿಯಲ್ಲಿ ನಡೆದಿದೆ.
ಸಂಜೆ ಸುಮಾರು 7 ಗಂಟೆ ವೇಳೆಗೆ ವೇಗನರ್ ಕಾರು ತಿರುವಿನಲ್ಲಿ ಪಲ್ಟಿಯಾದ ಘಟನೆ ಸಂಭವಿಸಿದೆ. ಗಣೇಶಗುಡಿಯಿಂದ ಯರಗಟ್ಟಿಗೆ ಮರಳುತ್ತಿದ್ದ ಐವರು ಪ್ರಯಾಣಿಕರು ಕಾರಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಹಿಂಬದಿ ಟೈರ್ ಪಂಚರ್ ಆಗಿ ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಈ ಅವಘಡ ಸಂಭವಿಸಿದೆ ಎಂದು ತಿಳಿದುಬಂದಿದೆ.
ಅಪಘಾತದ ತೀವ್ರತೆಯ ನಡುವೆಯೂ ಕಾರಿನಲ್ಲಿದ್ದ ಎಲ್ಲ ಪ್ರಯಾಣಿಕರೂ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದ್ದು, ತಿರುವು ಪ್ರದೇಶಗಳಲ್ಲಿ ವಾಹನ ಚಲಾಯಿಸುವಾಗ ಹೆಚ್ಚಿನ ಎಚ್ಚರಿಕೆ ವಹಿಸುವಂತೆ ಪೊಲೀಸರು ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ.
