ಕರಾವಳಿ ವಾಯ್ಸ್ ನ್ಯೂಸ್ 

ಹಳಿಯಾಳ: ತಾಲೂಕಿನ ಕಾಳಗಿನಕೊಪ್ಪ ಗ್ರಾಮದಲ್ಲಿ ಮನೆಯಲ್ಲಿ ಸಂಗ್ರಹಿಸಿಟ್ಟಿದ್ದ ನಾಡ ಬಾಂಬ್ ಸ್ಫೋಟಗೊಂಡ ಪರಿಣಾಮ ಹಲವು ಮನೆಗಳಿಗೆ ಹಾನಿಯಾಗಿರುವ ಘಟನೆ ಸೋಮವಾರ ಮುಂಜಾನೆ ನಡೆದಿದೆ.

ಮನೆಯೊಂದರಲ್ಲಿ ಇಡಲಾಗಿದ್ದ ನಾಡ ಬಾಂಬ್ ಏಕಾಏಕಿ ಸ್ಫೋಟಗೊಂಡಿದ್ದು, ಅದರ ತೀವ್ರತೆಗೆ ಸುತ್ತಮುತ್ತಲಿನ ಕೆಲವು ಮನೆಗಳ ಗೋಡೆಗಳು ಹಾಗೂ ಕಿಟಕಿಗಳಿಗೆ ಹಾನಿಯಾಗಿದೆ. ಭಾರೀ ಸದ್ದು ಕೇಳಿ ಗ್ರಾಮಸ್ಥರು ಬೆಚ್ಚಿಬಿದ್ದಿದ್ದು, ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಅಥವಾ ಗಾಯಗಳಾಗಿಲ್ಲ ಎಂದು ತಿಳಿದುಬಂದಿದೆ. ಆದರೆ ಸ್ಫೋಟದ ಬಳಿಕ ಮನೆ ಮಾಲೀಕ ಸ್ಥಳದಿಂದ ಪರಾರಿಯಾಗಿದ್ದಾನೆ ಎನ್ನಲಾಗಿದೆ. ಅಲ್ಲದೆ, ಮನೆಯಲ್ಲಿ ಇನ್ನೂ ಕೆಲವು ನಾಡ ಬಾಂಬ್‌ಗಳು ಉಳಿದಿರುವ ಸಾಧ್ಯತೆ ಇರುವುದರಿಂದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಘಟನೆಯ ಕುರಿತು ಮಾಹಿತಿ ಪಡೆದ ಹಳಿಯಾಳ ಪೊಲೀಸರು ಸ್ಥಳ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸ್ಫೋಟಕ್ಕೆ ನಿಖರ ಕಾರಣ ಹಾಗೂ ನಾಡ ಬಾಂಬ್‌ಗಳನ್ನು ಏಕೆ ಸಂಗ್ರಹಿಸಲಾಗಿತ್ತು ಎಂಬ ಕುರಿತು ತನಿಖೆ ಮುಂದುವರಿದಿದೆ.

 

Please Share: