ಕರಾವಳಿ ವಾಯ್ಸ್ ನ್ಯೂಸ್
ಕಾರವಾರ: ಮಳೆಗಾಲದಲ್ಲಿ ಗುಡ್ಡ ಕುಸಿತದ ಅಪಾಯದ ಹಿನ್ನೆಲೆಯಲ್ಲಿ ತಾಲೂಕಿನ ಬಿಣಗಾ ಕರಿದೇವಸ್ಥಾನದಿಂದ ಅರಗಾ ಮಹಾದೇವಸ್ಥಾನ ಕ್ರಾಸ್ವರೆಗೆ ರಾಷ್ಟ್ರೀಯ ಹೆದ್ದಾರಿ-66ರಲ್ಲಿ ಜುಲೈ 4ರಿಂದ ಮಳೆಗಾಲ ಮುಗಿಯುವವರೆಗೆ ಏಕಮುಖ ಸಂಚಾರಕ್ಕೆ ಮಾತ್ರ ಅವಕಾಶ ಕಲ್ಪಿಸಿ ಜಿಲ್ಲಾಧಿಕಾರಿ ಕೆ. ಲಕ್ಷ್ಮಿಪ್ರಿಯಾ ಆದೇಶ ಹೊರಡಿಸಿದ್ದಾರೆ.
ಬಿಣಗಾ ಕರಿದೇವಸ್ಥಾನದ ಸಮೀಪ ರಾಷ್ಟ್ರೀಯ ಹೆದ್ದಾರಿಯ ಅಂಚಿನಲ್ಲಿರುವ ಗುಡ್ಡದಿಂದ ಭಾರಿ ಮಳೆಯ ಸಂದರ್ಭದಲ್ಲಿ ಕಲ್ಲು ಮತ್ತು ಮಣ್ಣು ರಸ್ತೆಗೆ ಉರುಳಿ ಬೀಳುವ ಸಾಧ್ಯತೆ ಇದ್ದು, ಇದರಿಂದ ವಾಹನ ಸವಾರರು ಹಾಗೂ ಪ್ರಯಾಣಿಕರ ಜೀವಕ್ಕೆ ಅಪಾಯ ಉಂಟಾಗುವ ಸಾಧ್ಯತೆಯನ್ನು ಗಮನಿಸಿ ಮುಂಜಾಗ್ರತಾ ಕ್ರಮವಾಗಿ ಈ ಆದೇಶ ಜಾರಿಗೊಳಿಸಲಾಗಿದೆ.
ಆದ್ದರಿಂದ ಬಿಣಗಾದಿಂದ ಅರಗಾ ಗ್ರಾಮದವರೆಗೆ ರಾಷ್ಟ್ರೀಯ ಹೆದ್ದಾರಿ-66ರಲ್ಲಿ ಏಕಮುಖ ಸಂಚಾರ ವ್ಯವಸ್ಥೆ ಜಾರಿಯಲ್ಲಿದ್ದು, ವಾಹನ ಸವಾರರು ಸಂಚಾರ ನಿಯಮಗಳನ್ನು ಪಾಲಿಸಿ ಪರ್ಯಾಯ ಮಾರ್ಗ ಹಾಗೂ ಸಂಚಾರ ಪೊಲೀಸರ ಸೂಚನೆಗಳನ್ನು ಅನುಸರಿಸುವಂತೆ ಜಿಲ್ಲಾಡಳಿತ ಮನವಿ ಮಾಡಿದೆ.
