ಕರಾವಳಿ ವಾಯ್ಸ್ ನ್ಯೂಸ್
ಹೊನ್ನಾವರ: ಅಡುಗೆ ಮಾಡುವ ವೇಳೆ ಉಂಟಾದ ಬೆಂಕಿ ಅವಘಡದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ಘಟನೆ ತಾಲೂಕಿನ ಮಾವಿನಕುರ್ವಾ ಗ್ರಾಮದಲ್ಲಿ ನಡೆದಿದೆ.
ಮೃತರನ್ನು ಸವಿತಾ ಸುಬ್ರಾಯ ಅಂಬಿಗ (37) ಎಂದು ಗುರುತಿಸಲಾಗಿದೆ. ಈ ಸಂಬಂಧ ಮೃತೆಯ ಅಣ್ಣ ಮೋಹನ ಅಂಬಿಗ ನೀಡಿದ ದೂರಿನ ಮೇರೆಗೆ ಹೊನ್ನಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸವಿತಾ ಅವರಿಗೆ ಸುಮಾರು 17 ವರ್ಷಗಳ ಹಿಂದೆ ಮದುವೆಯಾಗಿದ್ದು, ಇಬ್ಬರು ಮಕ್ಕಳು ಇದ್ದರು. ಅವರ ಪತಿ ಎಂಟು ವರ್ಷಗಳ ಹಿಂದೆ ಮೃತಪಟ್ಟಿದ್ದರು. ಜನವರಿ 20ರಂದು ಬೆಳಿಗ್ಗೆ ಸುಮಾರು 6 ಗಂಟೆ ಸುಮಾರಿಗೆ ಮನೆಯ ಅಡುಗೆಮನೆಯಲ್ಲಿ ಅಡುಗೆ ಮಾಡುವ ವೇಳೆ ಅವರು ಧರಿಸಿದ್ದ ನೈಟಿಗೆ ಕಟ್ಟಿಗೆ ಒಲೆಯ ಬೆಂಕಿ ತಗುಲಿ, ಬೆಂಕಿ ದೇಹದ ಮೇಲ್ಭಾಗಕ್ಕೆ ವ್ಯಾಪಿಸಿತ್ತು. ತಕ್ಷಣ ಗಾಯಗೊಂಡ ಅವರನ್ನು ಹೊನ್ನಾವರ ತಾಲೂಕು ಆಸ್ಪತ್ರೆಗೆ ದಾಖಲಿಸಿ, ಬಳಿಕ ಹೆಚ್ಚಿನ ಚಿಕಿತ್ಸೆಗೆ ಕಾರವಾರ ಜಿಲ್ಲಾ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು.
ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸವಿತಾ ಅವರು ಗುರುವಾರ ರಂದು ಬೆಳಿಗ್ಗೆ 9.55ಕ್ಕೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಈ ಕುರಿತು ಹೊನ್ನಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ಕ್ರಮ ಕೈಗೊಳ್ಳಲಾಗಿದೆ.

