ಕರಾವಳಿ ವಾಯ್ಸ್ ನ್ಯೂಸ್
ಕಾರವಾರ: ತಾಲೂಕಿನ ಮಾಜಾಳಿ ಚೆಕ್ಪೋಸ್ಟ್ನಲ್ಲಿ ಅಬಕಾರಿ ಇಲಾಖೆ ನಡೆಸಿದ ಕಾರ್ಯಾಚರಣೆಯಲ್ಲಿ ಪರವಾನಗಿ ಇಲ್ಲದೆ ಸಾಗಿಸಲಾಗುತ್ತಿದ್ದ 1,296 ಲೀಟರ್ ಮದ್ಯವನ್ನು ಜಪ್ತಿ ಮಾಡಿ, ಒಬ್ಬ ಆರೋಪಿಯನ್ನು ಬಂಧಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ₹17 ಲಕ್ಷ ಮೌಲ್ಯದ ಮದ್ಯ ಹಾಗೂ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ.
ಬಂಧಿತ ಆರೋಪಿಯನ್ನು ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯ ಪೆರಿಯಾ ಗ್ರಾಮದ ಮನ್ಸೂರ್ ಮುಹಮ್ಮದ್ (32) ಎಂದು ಗುರುತಿಸಲಾಗಿದೆ. ಈತ KE-41-D-1087 ನೋಂದಣಿ ಸಂಖ್ಯೆಯ ಅಶೋಕ್ ಲೇಲ್ಯಾಂಡ್ ಸರಕು ಸಾಗಣೆ ವಾಹನದಲ್ಲಿ ಮದ್ಯವನ್ನು ಸಾಗಿಸುತ್ತಿದ್ದನು.
ಅಬಕಾರಿ ಇಲಾಖೆ ಅಧಿಕಾರಿಗಳು ಜೂನ್ 28ರಂದು ಮಾಜಾಳಿ ಚೆಕ್ಪೋಸ್ಟ್ನಲ್ಲಿ ರಸ್ತೆಗಾವಲು ಕರ್ತವ್ಯದಲ್ಲಿದ್ದ ವೇಳೆ ಅನುಮಾನಾಸ್ಪದವಾಗಿ ಸಂಚರಿಸುತ್ತಿದ್ದ ವಾಹನವನ್ನು ತಡೆದು ಪರಿಶೀಲಿಸಿದರು. ಆಗ ಯಾವುದೇ ಪರವಾನಗಿ ಇಲ್ಲದೆ 150 ಬಾಕ್ಸ್ಗಳಲ್ಲಿ ವಿವಿಧ ಬ್ರಾಂಡ್ನ ಒಟ್ಟು 1,296 ಲೀಟರ್ ಐಎಂಎಲ್ ಮದ್ಯವನ್ನು ಕರ್ನಾಟಕಕ್ಕೆ ಅಕ್ರಮವಾಗಿ ಸಾಗಿಸುತ್ತಿರುವುದು ಪತ್ತೆಯಾಗಿದೆ.
ಕಾರ್ಯಾಚರಣೆಯಲ್ಲಿ ₹9 ಲಕ್ಷ ಮೌಲ್ಯದ ಮದ್ಯ ಹಾಗೂ ₹8 ಲಕ್ಷ ಮೌಲ್ಯದ ವಾಹನವನ್ನು ಜಪ್ತಿ ಮಾಡಲಾಗಿದೆ.
ಆರೋಪಿಯನ್ನು ವಶಕ್ಕೆ ಪಡೆದು ಕರ್ನಾಟಕ ಅಬಕಾರಿ ಕಾಯ್ದೆ-1965ರ ಸಂಬಂಧಿತ ಕಲಂಗಳಡಿ ಪ್ರಕರಣ ದಾಖಲಿಸಿಕೊಂಡಿದ್ದು, ಮುಂದಿನ ತನಿಖೆ ಮುಂದುವರಿದಿದೆ.
