ಕರಾವಳಿ ವಾಯ್ಸ್ ನ್ಯೂಸ್
ಶಿರಸಿ: ತಾಲೂಕಿನ ಬನವಾಸಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ದನ ಕಳ್ಳತನ ಪ್ರಕರಣವನ್ನು ಭೇದಿಸಿರುವ ಪೊಲೀಸರು ಇಬ್ಬರು ಅಂತರ ಜಿಲ್ಲಾ ಆರೋಪಿಗಳನ್ನು ಬಂಧಿಸಿ, ಕಳ್ಳತನಕ್ಕೆ ಬಳಸಿದ್ದ ಸುಮಾರು ₹2 ಲಕ್ಷ ಮೌಲ್ಯದ ಕಾರನ್ನು ಜಪ್ತಿ ಮಾಡಿದ್ದಾರೆ.
ಕಳೆದ ಮೇ 20ರ ರಾತ್ರಿ ರಿಂದ ಮೇ 21ರ ಬೆಳಗಿನ ಜಾವದ ನಡುವೆ ಮನೆಯ ಮುಂಭಾಗ ರಸ್ತೆ ಬದಿಯಲ್ಲಿ ಕಟ್ಟಿದ್ದ ಕಪ್ಪು ಬಣ್ಣದ ಆಕಳನ್ನು ಕಳ್ಳತನ ಮಾಡಲಾಗಿತ್ತು. ಈ ಕುರಿತು ಬನವಾಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚಿಸಿ ತನಿಖೆ ಕೈಗೊಳ್ಳಲಾಗಿತ್ತು.
ತನಿಖೆಯ ವೇಳೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ಹೊನ್ನೆಬಾಗಿ ನಿವಾಸಿ ಮಹಮ್ಮದ್ ಇಸ್ಮಾಯಿಲ್ (20) ಹಾಗೂ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲ್ಲೂಕಿನ ಕಾಗೆಕೋಡಮಗ್ಗಿ ನಿವಾಸಿ ಮಹಮ್ಮದ್ ವಾಸೀಂ (26) ಅವರನ್ನು ಗುರುವಾರರಂದು ಬಂಧಿಸಲಾಗಿದೆ.
ಆರೋಪಿಗಳಿಂದ ಕಳ್ಳತನ ಕೃತ್ಯಕ್ಕೆ ಬಳಸಿದ್ದ ಕೆಎ-17-ಎಎ-7082 ಸಂಖ್ಯೆಯ ಟಾಟಾ ಇನ್ಟ್ರಾ ಕಾರನ್ನು ಜಪ್ತಿ ಮಾಡಲಾಗಿದೆ. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಜಿಲ್ಲಾ ಪೊಲೀಸ್ ಅಧೀಕ್ಷಕ ದೀಪನ್ ಎನ್.ಎಂ., ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕೃಷ್ಣಮೂರ್ತಿ ಜಿ., ಶಿರಸಿ ಉಪ ವಿಭಾಗದ ಡಿವೈಎಸ್ಪಿ ಗೀತಾ ಪಾಟೀಲ್ ಹಾಗೂ ಶಿರಸಿ ವೃತ್ತದ ಸಿಪಿಐ ಇ.ಸಿ. ಸಂಪತ್ ಅವರ ಮಾರ್ಗದರ್ಶನದಲ್ಲಿ, ಬನವಾಸಿ ಪೊಲೀಸ್ ಠಾಣೆಯ ಪಿಎಸ್ಐ ಮಹಾಂತಪ್ಪ ಜಿ. ಕುಂಬಾರ, ಪಿಎಸ್ಐ ರವೀಂದ್ರ ಬಿರಾದರ್ ಹಾಗೂ ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದು, ತಂಡದ ಕಾರ್ಯವನ್ನು ಪೊಲೀಸ್ ಇಲಾಖೆ ಅಭಿನಂದಿಸಿದೆ.
