ಯಲ್ಲಾಪುರ: ತಾಲೂಕಿನ ಪ್ರಸಿದ್ಧ ಕಾನೂರು ಜಲಪಾತಕ್ಕೆ ಪ್ರವಾಸಕ್ಕೆ ಬಂದಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲಾದ ದಾರುಣ ಘಟನೆ ಮಂಗಳವಾರ ನಡೆದಿದೆ.
ಧಾರವಾಡ ಮೂಲದ ಸುಹೇಲ್ ಸೈಯದ್ ಅಲಿ ಶೇಖ್ (21) ಕಾಣೆಯಾದ ವಿದ್ಯಾರ್ಥಿಯಾಗಿದ್ದು, ಹಳಿಯಾಳ ಇಂಜಿನಿಯರಿಂಗ್ ಕಾಲೇಜಿನ E&C ವಿಭಾಗದ ಅಂತಿಮ ವರ್ಷದ ವಿದ್ಯಾರ್ಥಿ ಎನ್ನಲಾಗಿದೆ.
ಸುಹೇಲ್ ಸೇರಿದಂತೆ ನಾಲ್ಕು ಮಂದಿ ವಿದ್ಯಾರ್ಥಿಗಳು ಹಾಗೂ ನಾಲ್ಕು ಮಂದಿ ವಿದ್ಯಾರ್ಥಿನಿಯರು ಸೇರಿ ಒಟ್ಟು ಎಂಟು ಮಂದಿ ತಂಡ ಜಲಪಾತಕ್ಕೆ ಪ್ರವಾಸಕ್ಕೆ ಬಂದಿದ್ದರು. ಜಲಪಾತದ ಎದುರು ಫೋಟೋಶೂಟ್ ಮಾಡುವ ವೇಳೆ ಕಾಲು ಜಾರಿ ಬಿದ್ದ ಸುಹೇಲ್, ಜಲಪಾತದ ನೀರಿನೊಂದಿಗೆ ತೇಲಿ ಹೋಗಿದ್ದಾರೆ.
ಘಟನಾ ಸ್ಥಳಕ್ಕೆ ಯಲ್ಲಾಪುರ ಸಿಪಿಐ ರಮೇಶ್ ಹರಗಾಪುರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅರಣ್ಯ ಇಲಾಖೆ ಹಾಗೂ ಅಗ್ನಿಶಾಮಕ ದಳದ ಸಹಾಯದಿಂದ ಶೋಧ ಕಾರ್ಯ ಮುಂದುವರಿದಿದೆ. ಪ್ರಕರಣವನ್ನು ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ದಾಖಲಿಸಲಾಗಿದೆ.


