ಕರಾವಳಿ ವಾಯ್ಸ್ ನ್ಯೂಸ್ 

ಕಾರವಾರ: ಅತೀವೇಗ ಮತ್ತು ನಿರ್ಲಕ್ಷ್ಯ ಚಾಲನೆಯಿಂದ ಸಂಭವಿಸಿದ ರಸ್ತೆ ಅಪಘಾತದಲ್ಲಿ ಬೈಕ್ ಸವಾರನಿಗೆ ಗಾಯಗಳಾಗಿದ್ದು, ಅಪಘಾತದ ಬಳಿಕ ಟಿಪ್ಪರ್ ಡಂಪರ್ ಚಾಲಕ ಸ್ಥಳದಿಂದ ಪರಾರಿಯಾದ ಘಟನೆ ಕಾರವಾರ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಏಪ್ರಿಲ್ 23ರಂದು ಬೆಳಿಗ್ಗೆ ಸುಮಾರು 6:30 ಗಂಟೆಗೆ ರಾಜ್ಯ ಹೆದ್ದಾರಿ-06ರಲ್ಲಿ ಈ ಅಪಘಾತ ಸಂಭವಿಸಿದೆ. ಕಾರವಾರ ಕಡೆಯಿಂದ ಕೈಗಾ ಕಡೆಗೆ ತೆರಳುತ್ತಿದ್ದ ಟಿಪ್ಪರ್ ಡಂಪರ್ (ನಂ: KA-25/AB-9843) ವಾಹನವನ್ನು ಚಾಲಕ ಅತಿವೇಗ ಹಾಗೂ ನಿರ್ಲಕ್ಷ್ಯದಿಂದ ಚಲಾಯಿಸಿಕೊಂಡು ಬಂದಿದ್ದು, ವೈಲವಾಡಾ ಗ್ರಾಮದ ಶ್ರೀ ಮಾಲ್ಗುಡಿ ದೇವಸ್ಥಾನದ ಕ್ರಾಸ್ ಸಮೀಪ ಎದುರು ದಿಕ್ಕಿನಿಂದ ಬರುತ್ತಿದ್ದ ಬೈಕ್ ಗೆ ಡಿಕ್ಕಿ ಹೊಡೆದಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಅಪಘಾತದಲ್ಲಿ ಬೈಕ್ ಸವಾರ ಜೋಮ್ಯಾಟೋ ಉದ್ಯೋಗಿ ರೋಹಿತ್ (21), ಅವರಿಗೆ ಬಲ ಕಾಲಿನ ಮೊಣಕಾಲು ಹಾಗೂ ಪಾದ ಭಾಗದಲ್ಲಿ ಗಾಯಗಳಾಗಿವೆ. ತಕ್ಷಣವೇ ಸ್ಥಳೀಯರು ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸಿದ್ದು ಚಿಕಿತ್ಸೆ ನೀಡಲಾಗಿದೆ.

ಡಿಕ್ಕಿಯ ಬಳಿಕ ಟಿಪ್ಪರ್ ಚಾಲಕ ವಾಹನವನ್ನು ನಿಲ್ಲಿಸದೆ ಸ್ಥಳದಿಂದ ಪರಾರಿಯಾಗಿರುವುದಾಗಿ ತಿಳಿದುಬಂದಿದೆ. ಈ ಸಂಬಂಧ ಕಾರವಾರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪರಾರಿಯಾದ ಚಾಲಕನ ಪತ್ತೆಗೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

 

Please Share: